ಜಿಲ್ಲಾ ಕಾರಾಗೃಹದ ಬಂಧಿಗಳಿಗೆ ಧ್ಯಾನದ ಮೂಲಕ ಮನ ಪರಿವರ್ತನೆಗೊಳ್ಳಲು ಕರೆ: ಲಲಿತಾ ಕಂದಗಲ್

ಗಂಗಾವತಿ : ಧ್ಯಾನ, ಜ್ಞಾನ, ಸತ್ಸಂಗ, ಮತ್ತು ಸ್ವಾಧ್ಯಾಯಗಳು ಎಂತಹ ಕಠಿಣ ಮನಸುಗಳನ್ನು ಕೂಡ ಪರಿವರ್ತನೆ ಗೊಳಿಸಬಲ್ಲವು ಎಂದು ಧ್ಯಾನ ಶಿಕ್ಷಕಿ ಲಲಿತಾ ನಾರಾಯಣ ಕಂದಗಲ್ ರವರು ನುಡಿದರು.

ಅವರು ಜೂನ್-೨೨ ಭಾನುವಾರ ಕೊಪ್ಪಳ ಜಿಲ್ಲಾ ಕಾರಾಗೃಹದಲ್ಲಿ ನಡೆದ ʼಚಿಂತನ ಮಂಥನʼ ಕಾರ್ಯಕ್ರಮದಲ್ಲಿ ಸುಮಾರು ೧೩೦ಕ್ಕೂ ಹೆಚ್ಚು ಕಾರಾಗೃಹದ ಬಂಧಿಗಳನ್ನು ಉದ್ದೇಶಿಸಿ ಮಾತನಾಡಿದರು.

“ಜೈಲುವಾಸ ಶಿಕ್ಷೆಯಲ್ಲ, ಅದು  ಒಂದು ಹೊಸ ಶಿಕ್ಷಣ,” ಎಂದು ಅವರು ಹೇಳಿದರು. ಅನೇಕ ಮಹನೀಯರಾದ ನೆಹರು, ಗಾಂಧಿ, ನೆಲ್ಸನ್ ಮಂಡೇಲಾರಂತಹ ಜೈಲುವಾಸದಲ್ಲಿದ್ದಾಗಲೇ ಆ ಸಂದರ್ಭವನ್ನು ಅಧ್ಯಯನಕ್ಕಾಗಿ, ಬರವಣಿಗೆಗಾಗಿ ಬಳಸಿಕೊಂಡು ಜೈಲುವಾಸವನ್ನು ಸಾರ್ಥಕ ಪಡಿಸಿಕೊಂಡಿದ್ದಾರೆ.

ಅದೇ ರೀತಿ ನೀವು ಕೂಡ ಧ್ಯಾನ, ಅಧ್ಯಯನದಲ್ಲಿ ತೊಡಗಿ ಪರಿವರ್ತನೆಗೆ ಮುಂದಾಗಿ ಎಂದು ನುಡಿದರು. ಕಾರಾಗೃಹದಂತ ಸ್ಥಳಗಳಲ್ಲಿ ಚಿಂತನ ಮಂಥನದಂತಹ ಅತ್ಯುತ್ತಮ ಮನ ಪರಿವರ್ತನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಕಾರಾಗೃಹ ಅಧ್ಯಕ್ಷಕರನ್ನು ಮತ್ತು ಅಲ್ಲಿನ ಸಿಬ್ಬಂದಿಗಳನ್ನು ತುಂಬು ಹೃದಯದಿಂದ ಅಭಿನಂದಿಸಿದರು.

ವಿಶೇಷ ಆಹ್ವಾನಿತರಾದ ಡಾ. ನಾರಾಯಣ ಕಂದಗಲ್ ರವರು ಬಂಧಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಪಶ್ಚಾತಾಪಕ್ಕಿಂತ ಮಿಗಿಲಾದ ಪರಿವರ್ತನೆ ಮತ್ತೊಂದಿಲ್ಲ. ನಿಮ್ಮೊಳಗಿನ ಅರಿವೇ ನಿಮಗೆ ಗುರು. ನೀವು ಈ ಕ್ಷಣದಲ್ಲಿಯೇ ಪರಿವರ್ತನೆಗೊಳ್ಳಲು ಸಾಧ್ಯವಿದೆ. ಅದಕ್ಕೆ ನೀವೆಲ್ಲ ಪ್ರಯತ್ನಿಸಿ ಎಂದು ನುಡಿದರು.

ಜೈಲಿನ ಬಂಧಿಯೊಬ್ಬರು ಇಂತಹ ಧ್ಯಾನ, ಸತ್ಸಂಗದಂತಹ ಸಂಗತಿ ನನಗೆ ಮೊದಲೇ ತಿಳಿದಿದ್ದರೆ ಬಹುಶಃ ನಾನು ಈ ಸ್ಥಳಕ್ಕೆ ಬರುತ್ತಿರಲಿಲ್ಲವೇನೊ ಎಂದು ಭಾವುಕರಾಗಿ ನುಡಿದರು.

ಕೊಪ್ಪಳ ಜಿಲ್ಲಾ ಕಾರಾಗೃಹದ ಅಧ್ಯಕ್ಷಕರಾದ ಅಂಬರೀಶ್ ಪೂಜಾರ್ ರವರು ಅಧ್ಯಕ್ಷತೆ ವಹಿಸಿ ಧ್ಯಾನ ಶಿಕ್ಷಕರ ಸಲಹೆಗಳನ್ನು ಗಂಭೀರವಾಗಿ ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.

ಮಾನಸಿಕ ಆಪ್ತ ಸಮಾಲೋಚಕರಾದ ಏ. ಕೆ. ಹಾವೋಜಿ ಅವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಜೈಲಿನ ಸಿಬ್ಬಂದಿ ರಾಥೋಡ್ ರವರು ಪ್ರಾರ್ಥನೆ ಮಾಡಿದರು.

ಜೈಲರ್ ಶ್ರೀರಾಮುಲು, ಸಹಾಯಕ ಜೈಲರ್ ಎಲ್. ಎಸ್. ತಿಪ್ಪೇಸ್ವಾಮಿ ಹಾಗೂ ಜೈಲಿನ ಇತರ ಸಿಬ್ಬಂದಿ ಉಪಸ್ಥಿತರಿದ್ದರು.

 

ಮಾಹಿತಿಗಾಗಿ
ಶ್ರೀಮತಿ ಲಲಿತಾ ನಾರಾಯಣ ಕಂದಗಲ್
ಧ್ಯಾನ ಶಿಕ್ಷಕರು, ಗಂಗಾವತಿ.
ಮೊ ನಂ: ೯೪೮೦೭೭೨೩೩೨

ಮಕ್ಕಳ ಕವಿತೆಗಳ ಗುಬ್ಬಿ ಗೂಡು ಗೊರೂರು ಅನಂತರಾಜು, ಹಾಸನ.

ಹಾಸನದ ಕವಯಿತ್ರಿ ಶ್ರೀವಿಜಯ ಅವರ ಗುಬ್ಬಿಗೂಡು ಮಕ್ಕಳ ಕವನ ಸಂಕಲನದಲ್ಲಿ 57 ಕವಿತೆಗಳಿವೆ. ವೃತ್ತಿಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ನಿವೃತ್ತಿಯಾದ ಬಳಿಕವೂ ಮಕ್ಕಳ ಒಡನಾಟದಲ್ಲಿದ್ದು ಪಾಠ ಮಾಡುವಾಗಿನ ಶಾಲಾ ಪಠ್ಯಗಳ ಪದ್ಯಗಳು ಇವರ ನೆನಪಿನಾಳದಲ್ಲಿ ಪ್ರಭಾವ ಬೀರಿ ಆ ದಿಶೆಯಲ್ಲಿ, ಕೆಲವು ಶಿಶುಗೀತೆಗಳು ರಚನೆಗೊಂಡಿವೆ.

“ಹಗಲಲ್ಲಿ ಸೂರ್ಯನ, ಇರುಳಲಿ ಚಂದ್ರನ ಇಟ್ಟವನಾರಮ್ಮ, ಕಪ್ಪನೆ ಮುಗಿಲಲಿ ಹನಿ ಹನಿ ಮಳೆಯೂ ಇಟ್ಟವನಾರಮ್ಮ….” ಎಂಬ ಸಾಲುಗಳ ಮೂಲಕ ತಾಯಿ-ಮಗು ಸಂಭಾಷಣೆಯ ಕಲ್ಪನೆ ಮೂಡಿಸಿ, ಕಲಾತ್ಮಕ ಭಾವವನ್ನೂ ತೋರಿಸಿದ್ದಾರೆ.

ಮಗುವಿನ ಮುಗ್ದ ಪ್ರಶ್ನೆಗಳಿಗೆ ತಾಯಿಯ ಜಾಣ್ಮಿಯ ಉತ್ತರ ಸರಳ ಸಾಲುಗಳಲ್ಲಿ ರಚಿಸುವುದು ಮೇಲ್ನೋಟಕ್ಕೆ ಸುಲಭವೆಂದುಕೊಂಡರೂ, ಪ್ರಾಸಬದ್ದತೆಯಲ್ಲಿನ ರಚನೆ ಅಷ್ಟೇ ಪ್ರಾಸವೂ ಹೌದು. ಶಿಶು ಕಾವ್ಯ ರಚನೆಗೆ ಪದಕೌಶಲ್ಯವೂ ಬೇಕು. ಮಗು ಕೇಳುವ ಜಗದ ಕೌತುಕದ ಪ್ರಶ್ನೆಗೆ ತಾಯಿ ಉತ್ತರಿಸಲಾಗದೆ ಮೌನಕ್ಕೆ ಶರಣಾಗಿದ್ದಾಳೆ.

“ಹೂವಿಂದ ಹೂವಿಗೆ ಹಾರುವ
ಚಿಟ್ಟೆಗೆ ಬಣ್ಣ ಬಳಿದವನಾರಮ್ಮ
ತಾಯಿಯ ಹೃದಯದಿ ಮಮತೆ
ಪ್ರೀತಿಯ ಇಟ್ಟವನಾರಮ್ಮ”

“ರಾತ್ರಿ ಆಕಾಶ ತೋರಿಸಿ ಮನೆಯ ಮಹಡಿಯಲ್ಲಿ ತುತ್ತು ತಿನಿಸುತ್ತಿರುವ ತಾಯಿ ಮಗುವಿನ ಪ್ರಶ್ನೆಗಳ ಸರಮಾಲೆಗೆ ತತ್ತರಿಸಿ ಉತ್ತರದ ಹುಡುಕಾಟದಲ್ಲಿ ಆಕಾಶ ನೋಡಿದ್ದಾಳೆ ಪಾಪ”. ಇನ್ನು, ನಮ್ಮ ಮನೆಯಲ್ಲೊಂದು ಪುಟ್ಟ ಪಾಪವಿರುವುದು ಎಂಬ ಶಿಶು ಕಾವ್ಯ ನೆನಪಿಸುತ್ತದೆ ಈ ಪದ್ಯದ ಸಾಲು

“ನಮ್ಮ ಮನೆಗೆ ಒಂದು ಪುಟ್ಟ ಪಾಪು ಬಂದಿತು.
ಎತ್ತಿಕೊಳ್ಳಲು ಹೋದರೆ ಅಮ್ಮ ಬಂದು ತಡೆದಳು
ಪ್ರೀತಿಯಿಂದ ಪಾಪು ಅಪ್ಪಿ
ಮುತ್ತು ಕೊಟ್ಟಳು”

ಇನ್ನೂ ನೀನ್ಯಾರಿಗಾದೆಯೋ ಎಲೆ ಮಾನವ.. ಎಂಬ ಗೋವಿನ ಹಾಡಿನ ಮಾದರಿಯ ಈ ಪದ್ಯದಲ್ಲಿ ಪರಿಸರ ಕಾಳಜಿಯಿದೆ.

ಮರ ನಾನು ಹೆಮ್ಮರ
ನಾನೆಂದೂ ಅಮರ
ನೀನಾರಿಗಾದೆಯೋ ಪಾಮರ..

ಈಗ ಬೇಸಿಗೆ ರಜೆ ಮುಗಿದು ಮಕ್ಕಳು ಶಾಲೆಗೆ ಹೊರಡಬೇಕಿದೆ. ಸರ್ಕಾರಿ ಶಾಲೆಯ ಶಿಕ್ಷಕಿಯಾಗಿ ಮೇಡಂ ಬನ್ನಿ ಮಕ್ಕಳೇ ಶಾಲೆಗೆ
ಎಂದು ಕಿರು ಪದ್ಯದಲ್ಲಿ ಕರೆ ನೀಡುತ್ತಾರೆ

“ರಜೆಯು ಮುಗಿಯಿತು
ಶಾಲೆ ತೆರೆಯಿತು
ಬನ್ನಿ ಮಕ್ಕಳೆ ಶಾಲೆಗೆ
ಶಾಲೆ ನಮ್ಮ ದೇಗುಲ
ಗುರುಗಳು ನಮ್ಮ ದೇವರು..”

ನಾವು ಬಾಲ್ಯದಲ್ಲಿ ಕಂಡ ನಮ್ಮ ಹಂಚಿನ ಮನೆಯ ಸೂರಿನಲ್ಲಿ ಗೂಡು ಕಟ್ಟುತ್ತಿದ್ದ ಗುಬ್ಬಚ್ಚಿ ಗೂಡನ್ನು ಇಂದು ಕಾಣುವುದು ಅಪರೂಪ.

“ನಮ್ಮ ಮನೆಯ ಸೂರಿನಲ್ಲಿ
ಗುಬ್ಬಿ ಗೂಡು ಕಟ್ಟಿತು
ಪುಟ್ಟ ಪುಟ್ಟ ಮರಿಗಳೊಡನೆ
ಅಲ್ಲಿ ವಾಸ ಮಾಡಿತು”

ಗಾಳಕ್ಕೆ ಸಿಕ್ಕ ಮೀನೊಂದು ಬೇಟೆಗಾರನಲ್ಲಿ ತನ್ನ ಪ್ರಾಣ ಭಿಕ್ಷೆ ಬೇಡುವುದು ಮರುಕ ಹುಟ್ಟಿಸುತ್ತದೆ.

ಒಂದು ದಿನ ಸಂಜೆ ನಾನು
ಗಾಳ ಹಾಕಿ ಹಿಡಿದೆ ಮೀನು
ದೀನವಾಗಿ ನನ್ನ ನೋಡಿ
ಪ್ರಾಣ ಭಿಕ್ಷೆ ಬೇಡಿತು

ಇನ್ನೂ ಬೇಸಿಗೆ ರಜೆಯಲ್ಲಿ ಅಜ್ಜನ ಮನೆಗೆ ಹೋಗುವ ಮಜವೇ ಬೇರೆ. ಆ ಅಜ್ಜ ಸುಡುಗಾಡು ಹಳ್ಳಿಯಲ್ಲೇ ಇರಲಿ ಅಲ್ಲಿಗೆ ರಜೆಯಲ್ಲಿ ಓಡುವುದೇ ಮಜ. ಹಳ್ಳಿಯ ಗಿಡ, ಮರ, ಕೆರೆ, ಬಯಲು ಅಜ್ಜನ ತೋಟದ ಮನೆ ಮಧ್ಯೆ ಸ್ವಚ್ಛಂದ ವಿಹಾರ ಯಾವ ಮಗುವಿಗೆ ತಾನೇ ಖುಷಿ ನೀಡುವುದಿಲ್ಲ.

ತೋಟದ ನಡುವೆ ಕಟ್ಟಿದ ಮನೆಯಿದು
ಸುತ್ತಲೂ ಮೇಯುವ ಹಸುಕರು
ಕೇಳುವರಾರು ನಮಗಿಲ್ಲಿ

ಗೊರೂರು ಅನಂತರಾಜು
ಹಾಸನ
ಮೊ: 9449462879