ಪ್ಲಾಸ್ಟಿಕ್ ಬಳಕೆ ಆರೋಗ್ಯಕ್ಕೆ ಮಾರಕ
ಗಂಗಾವತಿ: ನಗರದ ಪ್ರತಿಷ್ಠಿತ ಸಂಕಲ್ಪ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದ ಅಡಿಯಲ್ಲಿ ಹಿರೇಜಂತಕಲ್ ಹಾಗೂ ವಿಪ್ರ ಪ್ರದೇಶದಲ್ಲಿ ಶ್ರಮದಾನ ಮಾಡುವ ಮೂಲಕ ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್ ವಸ್ತುಗಳನ್ನು ಆಯ್ದು ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ಸಂದರ್ಭದಲ್ಲಿ ಅಲ್ಲಿಗೆ ಸಂಕಲ್ಪ ಪದವಿ ಮಹಿಳಾ ಮಹಾವಿದ್ಯಾಲಯ ಕಾರ್ಯಾಧ್ಯಕ್ಷರು ಹಾಗೂ ವಕೀಲರಾದ ನಾಗರಾಜ್ ಗುತ್ತೇದಾರ ಭೇಟಿ ನೀಡಿದರು.
ನಂತರ ಮಾತನಾಡಿದ ಅವರು, ಪರಿಸರಕ್ಕೆ ಮಾರಕವಾದ ಏಕ ಬಳಕೆ ಪ್ಲಾಸ್ಟಿಕ್ ಅನ್ನು ನಾವುಗಳೆಲ್ಲ ಸ್ವ ಇಚ್ಛೆಯಿಂದ ತ್ಯಜಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಜೀವನಶೈಲಿಗೆ ಬದಲಾಗಬೇಕಿದೆ. ಆ ಮೂಲಕ ಹಿರಿಯರಿಂದ ಬಳುವಳಿಯಾಗಿ ಬಂದ ಸುಂದರ-ಸ್ವಚ್ಚ ಪರಿಸರವನ್ನು ಯಥಾವತ್ತಾಗಿ ಮುಂದಿನ ತಲೆಮಾರಿಗೆ ಹಸ್ತಾಂತರಿಸಲು ಸಾಧ್ಯವಾಗುತ್ತದೆ. ನಾಗರೀಕತೆಯ ಬೆಳವಣಿಗೆಯ ಭಾಗವಾಗಿ ದಿನನಿತ್ಯದ ಜೀವನಶೈಲಿಯಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಅತಿಯಾಗಿ ಅವುಗಳು ಪರಿಸರಕ್ಕೆ ಮತ್ತು ಮಾನವನ ಆರೋಗ್ಯಕ್ಕೆ ತೀವ್ರವಾದ ಹಾನಿಯನ್ನು ಉಂಟುಮಾಡುತ್ತಿವೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ವಸ್ತುಗಳ ಬದಲಾಗಿ ಪರ್ಯಾಯ ಬಳಕೆಯ ಕಡೆಗೆ ನಾವೆಲ್ಲ ಗಮನಹರಿಸುವ ಮೂಲಕ ಆರೋಗ್ಯ ಪೂರ್ಣ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆಯಬೇಕಾಗಿದೆ ಎಂದು ಕರೆ ನೀಡಿದರು. ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲು ಹಲವಾರು ಕಾಯ್ದೆ ಕಾನೂನುಗಳಿದ್ದರೂ ಸಹ ಜನ ಅವುಗಳನ್ನು ಗಮನಿಸದೆ ಮುಂದುವರೆದಲ್ಲಿ ಮಾನವ ಸಂಕುಲ ಅಪಾಯಕ್ಕೆ ಸಿಲುಕುವುದರಲ್ಲಿ ಅನುಮಾನವಿಲ್ಲ. ಹಾಗಾಗಿ ಈ ಪವಿತ್ರ ಪರಿಸರದಲ್ಲಿ ವಾಸಿಸುವ ನಾವೆಲ್ಲರೂ ನಮ್ಮ ಸ್ವ-ಇಚ್ಚೆಯಿಂದ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದರ ಜೊತೆಗೆ ಪರಿಸರ ಸಂರಕ್ಷಣೆಗೆ ಹಾಗೂ ನಮ್ಮಗಳ ಆರೋಗ್ಯಯುತ ಜೀವನಕ್ಕೆ ಸಂಕಲ್ಪ ಮಾಡಬೇಕಾಗಿದೆ ಎಂದು ತಿಳಿಸಿದರು.
2021 ಆಗಸ್ಟ್ 12ರಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೊರಡಿಸಿದ ಅಧಿಸೂಚನೆಯಂತೆ ರಾಜ್ಯದಲ್ಲಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧವಿದ್ದರೂ ಅದನ್ನು ಸಂಪೂರ್ಣವಾಗಿ ತಡೆಗಟ್ಟಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ನಾವೆಲ್ಲರೂ ರಕ್ಕಸ ಪ್ಲಾಸ್ಟಿಕ್ ಅನ್ನು ತ್ಯಜಿಸಿ ಉತ್ತಮ ಪರಿಸರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕಿದೆ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿಗಳಾದ ರಮೇಶ್, ಶಿವಶರಣ ಹಾಗೂ ಮಹಾವಿದ್ಯಾಲಯದ ಸಿಬ್ಬಂದಿಯಾದ ರಾಹುಲ್ ಉಪಸ್ಥಿತರಿದ್ದರು. https://aratt.ai/@vishwaroopa_news_blog
